ಫತೇಹಾಬಾದ್(ಹರಿಯಾಣ): ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಜೆಡಿಯು, ಎಸ್ಎಡಿ ಮತ್ತು ಶಿವಸೇನೆ ಪಕ್ಷಗಳು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ತೊರೆದಿವೆ ಎಂದು ಬಿಹಾರದ ಉಪಮುಖ್ಯಮಂತ್ರಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.
ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ನಡೆದ ಐಎನ್ಎಲ್ಡಿ ರಾಲಿ ಉದ್ದೇಶಿಸಿ ಮಾತನಾಡಿದ ಅವರು, ಸುಳ್ಳು ಭರವಸೆಗಳನ್ನು ನೀಡುವ ಬಿಜೆಪಿಮಹಾನ್ ಸುಳ್ಳುಗಾರರ ಪಕ್ಷ ಎಂದು ಟೀಕಿಸಿದರು.
ಬಿಹಾರದ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಶಿರೋಮಣಿ ಅಕಾಲಿದಳದ ಸುಖ್ಬೀರ್ ಸಿಂಗ್ ಬಾದಲ್ ಮತ್ತು ಶಿವಸೇನಾ ಸಂಸದ ಅರವಿಂದ ಸಾವಂತ್ ವೇದಿಕೆಯಲ್ಲಿ ಹಾಜರಿದ್ದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಅವರು ಮೈತ್ರಿಕೂಟವನ್ನು ತೊರೆದಿದ್ದಾರೆ. ಈಗ ಎನ್ಡಿಎ ಎಲ್ಲಿದೆ ಎಂದು ಪ್ರಶ್ನಿಸಿದರು.
ಬಿಹಾರದ ಸರ್ಕಾರವು ಜನರಿಗೆ ಉದ್ಯೋಗ ನೀಡಲು ಆರಂಭಿಸಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದರು.