ನವದೆಹಲಿ: ‘ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ಸಂಬಂಧ ಪ್ರತ್ಯೇಕ ಕಾವಲು ಪಡೆಯನ್ನು ಸ್ಥಾಪಿಸಲಾಗುವುದು’ ಎಂದು ಕರ್ನಾಟಕದ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ತಿಳಿಸಿದೆ.
ರಾಜ್ಯದ ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಎನ್ಜಿಟಿಯ ದಕ್ಷಿಣ ಪೀಠಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಇಲಾಖೆ ಈ ಮಾಹಿತಿ ನೀಡಿದೆ.
‘ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇಡುವಂತೆ ಸಂಬಂಧಪಟ್ಟ ಜಿಲ್ಲೆಗಳ ಭೂವಿಜ್ಞಾನಿಗಳಿಗೆ ಸೂಚಿಸಲಾಗಿದೆ. ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್, ಕಂದಾಯ, ಅರಣ್ಯ ಇಲಾಖೆ ಹಾಗೂ ಪಿಡಬ್ಲ್ಯೂಡಿಗೆ ಅಧಿಕಾರ ನೀಡಲಾಗಿದೆ’ ಎಂದೂ ಇಲಾಖೆ ತಿಳಿಸಿದೆ.
‘ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಸಂಬಂಧ, ಕೆರೆಗಳು, ಹೊಂಡಗಳು ಹಾಗೂ ನದಿಗಳಿಗೆ ಸಂಪರ್ಕ ಕಲ್ಪಿಸುವ ಅನಧಿಕೃತ ಗ್ರಾಮೀಣ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇಲಾಖೆಯು ಮರಳು ಬ್ಲಾಕ್ಗಳನ್ನು ಗುರುತಿಸಿ, ವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ಹರಾಜು ಹಾಕುತ್ತಿದೆ’ ಎಂದು ತಿಳಿಸಿದೆ.
‘ಗುತ್ತಿಗೆದಾರರು ಮರಳು ಸಾಗಿಸಲು ಬಳಸುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರಿಂದ ಮರಳು ಸಾಗಾಟದ ಮೇಲೆ ನಿಗಾ ಇಡಲು ಸಾಧ್ಯವಾಗಲಿದೆ. ಪ್ರಮುಖ ಸ್ಥಳಗಳಲ್ಲಿ ವೇಬ್ರಿಡ್ಜ್ ಗಳು ಹಾಗೂ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಇಲಾಖೆಯು ಎನ್ಜಿಟಿಗೆ ಮಾಹಿತಿ ನೀಡಿದೆ.