ಹೈದರಾಬಾದ್: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧದ ತಮ್ಮ ಹೋರಾಟದಲ್ಲಿ ಭಾಗಿಯಾಗುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆ.ಸಿ.ಆರ್.) ಅವರು ಬಿಜೆಪಿಯೇತರ ಪಕ್ಷಗಳ ನಾಯಕರಲ್ಲಿ ಕೋರಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮೂಲಗಳು ತಿಳಿಸಿವೆ.
ದೇಶದಲ್ಲಿ ಅಪಾಯದಲ್ಲಿರುವ ಒಕ್ಕೂಟ ವ್ಯವಸ್ಥೆ, ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆಗಾಗಿ ರಾವ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದೂ ಹೇಳಿವೆ.
ಎನ್ಡಿಎ ಸರ್ಕಾರವು ದೇಶವನ್ನು ಆರ್ಥಿಕ ಬಿಕ್ಕಟ್ಟಿನತ್ತ ಕೊಂಡೊಯ್ಯುತ್ತಿದೆ. ಇಂತಹ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ರಾವ್ ಅವರು ಸಜ್ಜಾಗಿದ್ದಾರೆ ಎಂದಿವೆ.
ಈ ಕುರಿತು ರಾವ್ ಅವರು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಸೇರಿದಂತೆ ಹಲವರೊಂದಿಗೆ ಚರ್ಚಿಸಿದ್ದಾರೆ ಎಂದೂ ತಿಳಿಸಿವೆ.
ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪ್ರಮುಖ ವಿರೋಧ ಪಕ್ಷಗಳ ನಾಯಕರಿಂದ ರಾವ್ ಅವರಿಗೆ ಸಕಾರಾತ್ಮಕ ಪ್ರತಿಕ್ರಿಯೆ ಲಭಿಸಿದೆ ಎಂದು ಹೇಳಿವೆ.