ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. 140 ಕ್ಷೇತ್ರಗಳ ಪೈಕಿ 115 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೆಂದ್ರನ್ ಮಂಜೇಶ್ವರ ಮತ್ತು ಕೊನ್ನಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗೆ ಪಕ್ಷ ಸೇರಿದ್ದ ಮೆಟ್ರೋ ಮ್ಯಾನ್ ಖ್ಯಾತಿಯ ಇ ಶ್ರೀಧರನ್ ಪಾಲಕ್ಕಾಡ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ಶಾಸಕರೆ ಇರುವ ನೆಮೊಮ್ ಕ್ಷೇತ್ರದಿಂದ ಕುಮ್ಮನಂ ರಾಜಶೇಖರನ್ ಅವರು ಸ್ಪರ್ಧಿಸಲಿದ್ದಾರೆ. ಕಟ್ಟಕ್ಕಡದಿಂದ ಪಿ ಕೆ ಕೃಷ್ಣದಾಸ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಧರ್ಮದೋಮ್ ಕ್ಷೇತ್ರದಿಂದ ಸಿ ಕೆ ಪದ್ಮನಾಭನ್ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದರು.
ಕೇರಳ ವಿಧಾನಸಭೆಯ 14 ಜಿಲ್ಲೆಗಳ 140 ಕ್ಷೇತ್ರಗಳಿಗೆ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಯಲಿದೆ.