ತಿರುವನಂತಪುರ: ಅತ್ಯಾಚಾರ ಸಂತ್ರಸ್ತೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಅವರು ಭಾನುವಾರ ಕ್ಷಮೆಯಾಚಿಸಿದ್ದಾರೆ.
ಕಾಂಗ್ರೆಸ್ನ ಮಾಜಿ ಸಚಿವ ಎ.ಪಿ. ಅನಿಲ್ ಕುಮಾರ್, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಅವರು ಈಚೆಗೆ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದ ರಾಮಚಂದ್ರನ್ ಅವರು, ‘ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸ್ವಾಭಿಮಾನ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಅಥವಾ ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗದಿರಲು ಪ್ರಯತ್ನಿಸುತ್ತಾಳೆ’ ಎಂದು ಹೇಳಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.