ತಿರುವನಂತಪುರ: ಕೇರಳದಲ್ಲಿ ವರದಕ್ಷಿಣ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ರಾಜ್ಯ ಸರ್ಕಾರ ವರದಕ್ಷಿಣೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದಿದೆ.
ಕೇರಳದ ಎಲ್ಲಾ 14 ಜಿಲ್ಲೆಗಳಲ್ಲಿ ವರದಕ್ಷಿಣೆ ನಿಗ್ರಹ ಅಧಿಕಾರಿಗಳನ್ನು ನೇಮಿಸುವ ನಿಟ್ಟಿನಲ್ಲಿ ಈ ತಿದ್ದುಪಡಿಯನ್ನು ತರಲಾಗಿದೆ.
‘ಈಗಾಗಲೇ ತಿರುವನಂತಪುರ, ಎರ್ನಾಕುಲಂ ಮತ್ತು ಕೋಯಿಕ್ಕೋಡ್ನಲ್ಲಿ ಪ್ರಾದೇಶಿಕ ಮಟ್ಟದಲ್ಲಿ ಈ ರೀತಿಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸೇವೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಿಸಲಾಗುತ್ತದೆ’ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದರು.
‘ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ವರದಕ್ಷಿಣೆ ನಿಗ್ರಹ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಮುಖ್ಯ ವರದಕ್ಷಿಣೆ ನಿಗ್ರಹ ಅಧಿಕಾರಿಯಾಗಿ ಕೆಲಸ ಮಾಡಲಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ರಾಜ್ಯದಲ್ಲಿ ವರದಕ್ಷಿಣೆ ಪ್ರಕರಣಗಳು ಹೆಚ್ಚುತ್ತಿವೆ. ಈ ರೀತಿಯ ದೌರ್ಜನ್ಯಗಳನ್ನು ಶಮನಗೊಳಿಸಲು ವರದಕ್ಷಿಣೆ ನಿಗ್ರಹ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಈಗಾಗಲೇ ಅವರಿಗೆ ಮೊದಲ ಹಂತದ ತರಬೇತಿಯನ್ನು ನೀಡಲಾಗುತ್ತಿದೆ’ ಅವರು ಮಾಹಿತಿ ನೀಡಿದರು.
‘ಈ ಸಂಬಂಧ ಸಲಹಾ ಮಂಡಳಿ ರೂಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಂಡಳಿಯು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಿದೆ. ಶಾಲಾ–ಕಾಲೇಜುಗಳಲ್ಲಿ ಎನ್ಎಸ್ಎಸ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಲಿಂಗ ಸಮಾನತೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ಮೂಡಿಸಲಾಗುವುದು’ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.