ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿದ ಬೆನ್ನಲ್ಲೇ ಕೇರಳ ಸರ್ಕಾರವು ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಂಡಿದೆ.
ಈ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ಆದೇಶ ಪ್ರತಿಯನ್ನು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.
After Central Govt's notification, the Kerala govt issued an order declaring PFI and its associates or affiliates or fronts as an unlawful association. pic.twitter.com/mEQljXLe0c
— ANI (@ANI) September 29, 2022
ಜಾಗತಿಕ ಮಟ್ಟದ ಭಯೋತ್ಪಾದನಾ ಸಂಘಟನೆ ಐಎಸ್ ಮತ್ತು ಇತರ ಉಗ್ರಗಾಮಿ ಸಂಘಟನೆಗಳ ಜತೆಗೆ ನಂಟು ಹೊಂದಿದೆ ಹಾಗೂ ದೇಶ ದೊಳಗೆ ಕೋಮುದ್ವೇಷ ಹರಡಲು ಸಂಘಟನೆಯು ಯತ್ನಿಸಿದೆ ಎಂದು ಆರೋಪಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ವಿವಿಧ ರಾಜ್ಯಗಳ ಪೊಲೀಸರು ಇತ್ತೀಚಿನ ಕೆಲ ದಿನಗಳಲ್ಲಿ ಪಿಎಫ್ಐಗೆ ಸಂಬಂಧಿಸಿದ ಸ್ಥಳಗಳಲ್ಲಿ ಎರಡು ಬಾರಿ ಶೋಧ ನಡೆಸಿ, ಸಂಘಟನೆಯ ಹಲವು ಸದಸ್ಯರನ್ನು ಬಂಧಿಸಿದ್ದರು. ಅದಾದ ಬಳಿಕ ನಿಷೇಧದ ಆದೇಶ ಹೊರಬಿದ್ದಿದೆ. ಇದೇ 22ರಂದು ನಡೆದ ಶೋಧದ ಸಮಯದಲ್ಲಿ 106 ಮುಖಂಡರನ್ನು ಬಂಧಿಸಲಾಗಿತ್ತು. ಮಂಗಳವಾರ ನಡೆದ ಶೋಧದ ಸಂದರ್ಭದಲ್ಲಿ 170ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು ಅಥವಾ ವಶಕ್ಕೆ ಪಡೆಯಲಾಗಿತ್ತು.
ನಿಷೇಧದ ಬಳಿಕ ಪಿಎಫ್ಐ ಕಚೇರಿಗಳಿಗೆ ಬೀಗ ಹಾಕಿ ಮೊಹರು ಮಾಡುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಪಿಎಫ್ಐ ಸಂಘಟನೆಯು ಸಕ್ರಿಯವಾಗಿರುವ 17 ರಾಜ್ಯಗಳಲ್ಲಿ ಇರುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು.
ಪಿಎಫ್ಐಯನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿಯಲ್ಲಿ ನಿಷೇಧಿಸಲು ಅಗತ್ಯವಾದಷ್ಟು ಕಾರಣಗಳು ಇವೆಯೇ ಎಂಬುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ನ್ಯಾಯಮಂಡಳಿಯನ್ನು 30 ದಿನಗಳೊಳಗೆ ರಚಿಸಲಿದೆ. ತನ್ನನ್ನು ಸಮರ್ಥಿಸಿಕೊಳ್ಳಲು ಪಿಎಫ್ಐಗೆ ಅವಕಾಶ ಇದೆ.
2006ರಲ್ಲಿ ಆರಂಭವಾದ ಸಂಘಟನೆಯ ಮೇಲೆ 2010ರಿಂದಲೇ ನಿಗಾ ಇರಿಸಲಾಗಿತ್ತು. ಪಿಎಫ್ಐ ಪ್ರಬಲವಾಗಿರುವ ಕೇರಳದಲ್ಲಿ ಈ ಸಂಘಟನೆಯ ಕಾರ್ಯಕರ್ತರು ಪ್ರಾಧ್ಯಾಪಕ ಟಿ.ಜೆ. ಜೋಸೆಫ್ ಅವರ ಕೈ ಕತ್ತರಿಸಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಹಲವರು ತಪ್ಪಿತಸ್ಥರು ಎಂದು ನ್ಯಾಯಾಲಯವು ತೀರ್ಪು ನೀಡಿದೆ.
ದೇಶದಾದ್ಯಂತ ಪಿಎಫ್ಐ ಮತ್ತು ಅದರ ಸದಸ್ಯರ ವಿರುದ್ಧ 1,400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಭಯೋತ್ಪಾದನೆ ತಡೆ ಕಾನೂನುಗಳ ಅಡಿಯಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಘಟನೆಯು ರಹಸ್ಯ ತಂಡ ಒಂದನ್ನು ರಚಿಸಿಕೊಂಡಿದೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.