ತಿರುವನಂತಪುರ: ಕೇರಳದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸ್ಥಳವನ್ನು ಬದಲಾಯಿಸುವಂತೆ ಕೋರಿ ಕೇರಳ ಹೈಕೋರ್ಟ್ಗೆ ಮನವಿ ಮಾಡಲಾಗಿದೆ.
ಕೇರಳದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಇದೇ 20ರಂದು ನಡೆಯಲಿದೆ. ಈ ನಡುವೆ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಜಾರ್ಜ್ ಸೆಬಾಸ್ಟಿಯನ್ ಅವರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸ್ಥಳ ಬದಲಾಯಿಸುವಂತೆ ಕೋರಿ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ.
‘ಕೋವಿಡ್ ಸಾಂಕ್ರಾಮಿಕದ ದೃಷ್ಟಿಯಲ್ಲಿ ಈ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ರಾಜಭವನದಲ್ಲಿ ನಡೆಸಬೇಕು. ಜತೆಗೆ ಈ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಭಾಗವಹಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
‘ಕಳೆದ ವಾರ ಈ ಸಂಬಂಧ ನಾನು ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹಾಗಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ಧೇನೆ’ ಎಂದು ಜಾರ್ಜ್ ತಿಳಿಸಿದ್ದಾರೆ.
ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ 500 ಮಂದಿಯನ್ನು ಆಹ್ವಾನಿಸಲಾಗಿದೆ.