ನವದೆಹಲಿ: ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರು ಕೊನೆಯ ಕ್ಷಣದಲ್ಲಿ ‘ಸಶಸ್ತ್ರ ಸೀಮಾ ಬಲ್‘ನ(ಎಸ್ಎಸ್ಬಿ) 58ನೇ ಸಂಸ್ಥಾಪನಾ ದಿನದ ಸಮಾರಂಭದಿಂದ ದೂರ ಉಳಿದಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೆನಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಆದರೆ, ಅವರ ಸಚಿವ ಸಂಪುಟದ ಸಹೋದ್ಯೋಗಿ ನಿಸಿತ್ ಪ್ರಮಾಣಿಕ್ ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು ಎಂದು ‘ಹಿಂದುಸ್ತಾನ್ ಟೈಮ್ಸ್‘ ವರದಿ ಮಾಡಿದೆ.
‘ತುರ್ತು ಕೆಲಸದ ನಿಮಿತ್ತ ಟೆನಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ‘ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಅಕ್ಟೋಬರ್ 3ರಂದು ಲಖಿಂಪುರ ಖೇರಿ ಪ್ರಕರಣ ನಡೆದಿತ್ತು.ನಾಲ್ವರು ರೈತರು ಸೇರಿ ಎಂಟು ಮಂದಿಯ ಹತ್ಯೆಯಾದ ಲಖಿಂಪುರ–ಖೇರಿ ಪ್ರಕರಣವು ‘ಹತ್ಯೆ ಉದ್ದೇಶದ ಪೂರ್ವಯೋಜಿತ ಷಡ್ಯಂತ್ರ’ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಹೇಳಿದೆ.
ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.