ರಾಂಚಿ: ಜೈಲಿನಲ್ಲಿರುವ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಜಾಮೀನಿಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಒಂದು ವಾರ ಕಾಲ ಮುಂದೂಡಿದೆ.
ಈ ಕುರಿತು ಸಿಬಿಐ ತನ್ನ ಉತ್ತರವನ್ನು ಸಲ್ಲಿಸಲು ನ್ಯಾಯಾಲಯಕ್ಕೆ ಸಮಯ ಕೋರಿರುವುದರಿಂದ ಡುಮ್ಕಾ ಖಜಾನೆ ಪ್ರಕರಣದಲ್ಲಿನ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಏ.16ಕ್ಕೆ ಮುಂದೂಡಿದರು.
ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ತಮ್ಮ ವಾದ ಮಂಡಿಸಿದ ಲಾಲು ಪ್ರಸಾದ್ ಪರ ವಕೀಲರಾದ ಕಪಿಲ್ ಸಿಬಲ್ ಅವರು, ‘ರಾಜಕೀಯ ಕಾರಣಗಳಿಗಾಗಿ ನನ್ನ ಕಕ್ಷಿದಾರರನ್ನು ಜೈಲಿನಲ್ಲಿ ಇರಿಸಿಕೊಳ್ಳುವ ಸಲುವಾಗಿ ಸಿಬಿಐ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ಪ್ರತಿಪಾದಿಸಿದರು.
ಹೆಚ್ಚಿನ ಸಮಯ ಕೋರಿ ಸಿಬಿಐ ಪರ ವಕೀಲರು ಮಂಡಿಸಿದ ಮನವಿಯನ್ನು ಅಂಗೀಕರಿಸಿದ ನ್ಯಾಯಾಲಯವು, ಮುಂದಿನ ಮೂರು ದಿನಗಳಲ್ಲಿ ಈ ವಿಷಯದ ಬಗ್ಗೆ ತನಗೆ ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿತು.