ನವದೆಹಲಿ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ವಿದ್ಯುತ್ ಬಿಲ್ಗಳ ಲೂಟಿಯಿಂದ ಜನರು ತತ್ತರಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇದನ್ನು ಅಂತ್ಯಗೊಳಿಸಲಾಗುವುದು ಎಂದೂ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂಧನ ಇಲಾಖೆಯು ಕಾರ್ಮಿಕನೊಬ್ಬನಿಗೆ ₹19 ಕೋಟಿಗೂ ಹೆಚ್ಚು ವಿದ್ಯುತ್ ಶುಲ್ಕ ಪಾವತಿಸುವಂತೆ ನೋಟಿಸ್ ನೀಡಿರುವ ಕುರಿತ ಮಾಧ್ಯಮ ವರದಿಯೊಂದನ್ನು ಟ್ಯಾಗ್ ಮಾಡಿದ್ದಾರೆ.
‘ಬಿಜೆಪಿ ಆಡಳಿತದಲ್ಲಿ ರಾಜ್ಯದ ಸಾಮಾನ್ಯ ಜನರು ವಿದ್ಯುತ್ ಬಿಲ್ ಮತ್ತು ಸ್ಮಾರ್ಟ್ ಮೀಟರ್ ಲೂಟಿಯಿಂದಾಗಿ ತತ್ತರಿಸುತ್ತಿದ್ದಾರೆ’ ಎಂದು ಅವರು ಕಿಡಿಕಾರಿದ್ದಾರೆ.
‘ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಕುಟುಂಬಕ್ಕೆ ವಿದ್ಯುತ್ ಇಲಾಖೆಯು ₹19.19 ಕೋಟಿ ವಿದ್ಯುತ್ ಬಿಲ್ ಪಾವತಿಸುವಂತೆ ನೋಟಿಸ್ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಈ ಲೂಟಿ ನಿಲ್ಲುತ್ತದೆ’ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.