ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತೆಯ ವಯಸ್ಸು ಕಡಿಮೆ ಎಂಬುದು ಸಮರ್ಪಕ ಆಧಾರವಲ್ಲ: ’ಸುಪ್ರೀಂ‘

Last Updated 9 ನವೆಂಬರ್ 2021, 17:08 IST
ಅಕ್ಷರ ಗಾತ್ರ

ನವದೆಹಲಿ: ‘ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಅಪರಾಧಿಗೆ ಮರಣ ದಂಡನೆ ವಿಧಿಸಲು ಸಂತ್ರಸ್ತೆಯ ವಯಸ್ಸು ಮಾತ್ರವೇ ಅಥವಾ ಅದೇ ತೃಪ್ತಿಕರ ಅಂಶ ಎಂದು ಸೆಷನ್ಸ್‌ ನ್ಯಾಯಾಲಯ ಪರಿಗಣಿಸಿಲ್ಲ’ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ ಕರ್ನಾಟಕದ ಬೆಳಗಾವಿ ಜಿಲ್ಲೆ ಖಾನಾಪುರದ ಈರಪ್ಪ ಸಿದ್ದಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಈ ಅಭಿಪ್ರಾಯವ್ಯಕ್ತಪಡಿಸಿತು.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್‌ ಖನ್ನಾ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಈರಪ್ಪ ಸಿದ್ದಪ್ಪಗೆ ವಿಧಿಸಿದ್ದ ಮರಣ ದಂಡನೆಯನ್ನು ರದ್ದು ಮಾಡಿದ ನ್ಯಾಯಪೀಠ, 30 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತು. ಅಪರಾಧಿಗೆ ವಿಧಿಸಿರುವ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಕಷ್ಟು ಅಂಶಗಳಿವೆ ಎಂದು ಹೇಳಿದ ನ್ಯಾಯಪೀಠ, ಯಾವುದೇ ಕಾರಣಕ್ಕೂ ಅಪರಾಧಿಯನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡಬಾರದು ಎಂದು ಸೂಚಿಸಿತು.

2010ರಲ್ಲಿ ಈರಪ್ಪ ಸಿದ್ದಪ್ಪ 5 ವರ್ಷದ ಬಾಲಕಿಯನ್ನು ಅಪಹರಣ ಮಾಡಿ, ಅತ್ಯಾಚಾರ ಎಸಗಿದ್ದಲ್ಲದೇ, ಬಾಲಕಿಯನ್ನು ಕೊಲೆ ಮಾಡಿದ್ದ. ನಂತರ, ಶವವನ್ನು ಚೀಲವೊಂದರಲ್ಲಿ ಕಟ್ಟಿ, ನದಿಗೆ ಎಸೆದಿದ್ದ.

ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ಈರಪ್ಪಗೆ ಮರಣ ದಂಡನೆ ವಿಧಿಸಿತ್ತು. ಸೆಷನ್ಸ್‌ ಕೋರ್ಟ್‌ ವಿಧಿಸಿದ್ದ ಶಿಕ್ಷೆಯನ್ನು ಕಾಯಂಗೊಳಿಸಿ ಕರ್ನಾಟಕ ಹೈಕೋರ್ಟ್‌ 2017ರ ಮಾರ್ಚ್ 6ರಂದು ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT