ನವದೆಹಲಿ: ವಿಧಾನಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ಸಾವಿನ ಕುರಿತು ಸ್ವತಂತ್ರ ಸಂಸ್ಥೆಯಿಂದ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಲೋಕಸಭೆಯ ಸಭಾಪತಿ ಓಂ ಬಿರ್ಲಾ ಅವರು ಬುಧವಾರ ಹೇಳಿದ್ದಾರೆ.
‘ಧರ್ಮೇಗೌಡ ಅವರು ಪೀಠದಲ್ಲಿ ಇರುವಾಗ ಮೇಲ್ಮನೆಯಲ್ಲಿ ನಡೆದ ಘಟನೆಯು, ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಅವರ ಸಾವಿನ ಕುರಿತು ಸ್ವತಂತ್ರ ಸಂಸ್ಥೆಯಿಂದ ಉನ್ನತ ಮಟ್ಟದ ತನಿಖೆ ಅಗತ್ಯ’ ಎಂದಿದ್ದಾರೆ.
‘ಶಾಸನ ಸಭೆಗಳ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ’ ಎಂದು ಅವರು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.