ಮರಾಠಿ ಭಾಷಿಕರ ಮೇಲೆ ಲಾಠಿ ಪ್ರಹಾರಕ್ಕೆ: ಮಹಾರಾಷ್ಟ್ರ ಸಚಿವ ಖಂಡನೆ

ಮುಂಬೈ: ಕರ್ನಾಟಕದ ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಮರಾಠಿ ಭಾಷಿಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಮಹಾರಾಷ್ಟ್ರದ ನಗರಾಭಿವೃದ್ದಿ ಸಚಿವ ಏಕನಾಥ್ ಶಿಂಧೆ ಖಂಡಿಸಿದ್ದು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಗಸ್ಟ್ 28ರಂದು ಪತ್ರ ಬರೆದಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಮರಾಠಿಗರ ವಿರೋಧ ಇಲ್ಲ. ಆದರೆ, ಶಿವಾಜಿ ಮಹಾರಾಜರ ಪ್ರತಿಮೆಗೆ ತೀರ ಹತ್ತಿರದಲ್ಲಿಯೇ ಉದ್ದೇಶಪೂರ್ವಕವಾಗಿ ರಾಯಣ್ಣ ಪ್ರತಿಮೆ ಸ್ಥಾಪಿಸಲಾಗಿದೆ’ ಎಂದು ವಿವರಿಸಿದ್ದಾರೆ.
‘ಪ್ರತಿಮೆ ಪ್ರತಿಷ್ಠಾಪನೆಯ ವಿವಾದವನ್ನು ಬಳಸಿ ಮರಾಠಿ ಮತ್ತು ಕನ್ನಡ ಭಾಷಿಕರ ನಡುವೆ ಸಂಘರ್ಷ ಹುಟ್ಟುಹಾಕುವ ಹುನ್ನಾರ ನಡೆಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿದ್ದ ಮರಾಠಿ ಭಾಷಿಕರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿದ ಕಾರಣ ಗಲಾಟೆ ನಡೆದಿತ್ತು. ಆಗ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.