ನಾಗಪುರ: ವಿದ್ಯುತ್ ನಿಗಮದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕೇದಾರ್ ಹಾಗೂ ಇತರ ಮೂವರಿಗೆ ನಾಗಪುರ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮಂಗಲ ಮೊಟೆ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353ರ (ಹಲ್ಲೆ, ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ತಲಾ ₹ 14,000 ದಂಡ ವಿಧಿಸಲಾಗಿದೆ.
ನಾಗಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ವಿದ್ಯುತ್ ಪ್ರಸರಣ ಲೈನ್ ಅಳವಡಿಸುವ ವಿಚಾರವಾಗಿ ರೈತರು ಹಾಗೂ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (ಎಂಎಸ್ಇಡಿಸಿಎಲ್) ಅಧಿಕಾರಿಗಳ ನಡುವೆ 2017ರಲ್ಲಿ ವಿವಾದ ಸೃಷ್ಟಿಯಾಗಿತ್ತು. ಹೀಗಾಗಿ ಕೇದಾರ್ ಅವರು ತಮ್ಮ ಬೆಂಬಲಿಗರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು.
ಈ ಸಂಬಂಧ ಕೆಲ್ವಾಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿತ್ತು.