ಮುಂಬೈ: ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ ಮುಂಡೆ ಅವರಿಗೆ ಪಾರ್ಶ್ವವಾಯು (ಲಕ್ವ) ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
46 ವರ್ಷದ ಎನ್ಸಿಪಿ ಮುಖಂಡ ಧನಂಜಯ ಅವರಿಗೆ ಮಂಗಳವಾರ ರಾತ್ರಿ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ಅವರ ಆತ್ಮೀಯ ಮೂಲಗಳಿಂದ ತಿಳಿದುಬಂದಿದೆ.
'ಎಂದಿನಂತೆ ಕೆಲಸಗಳನ್ನು ಮುಗಿಸಿದರು. ಸಂಜೆ ತಮ್ಮ ಖಾಸಗಿ ನಿವಾಸದಲ್ಲಿ ಇದ್ದಾಗ ಧನಂಜಯ ಅವರ ಆರೋಗ್ಯದಲ್ಲಿ ಏರುಪೇರು ಸಂಭವಿಸಿದೆ. ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸಚಿವರ ಆಪ್ತರೊಬ್ಬರು ತಿಳಿಸಿದ್ದಾರೆ.
ಧನಂಜಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಪರೀಕ್ಷೆಯ ಫಲಿತಾಂಶ ತಿಳಿಸಿರುವುದಾಗಿಯೂ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಧನಂಜಯ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದ್ದು, ಧನಂಜಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಧನಂಜಯ ಅವರು ಹೃದಾಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.