ನವದೆಹಲಿ: ತೃಣಮೂಲ ಕಾಂಗ್ರೆಸ್ನ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ಮಮತಾ ಅವರಿಗೆ ಟಿಎಂಸಿ ವೇದಿಕೆ ಮಾಡಿಕೊಟ್ಟಿದೆ.
ರಾಜ್ಯಸಭೆ ಮತ್ತು ಲೋಕಸಭೆಯ ಪಕ್ಷದ ಸಂಸದರು ಸರ್ವಾನುಮತದಿಂದ ಮಮತಾ ಬ್ಯಾನರ್ಜಿ ಅವರನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು. ರಾಜ್ಯಸಭೆ ಸದಸ್ಯ ಡೆರೆಕ್ ಒ ಬ್ರಿಯೆನ್ ಈ ಕುರಿತ ನಿರ್ಧಾರ ಪ್ರಕಟಿಸಿದರು.
ಇದಕ್ಕೂ ಮೊದಲು ಈ ಸ್ಥಾನ ಅಲಂಕರಿಸಿದ್ದ ಸುದಿಪ್ ಬಂಡೋಪಾಧ್ಯಾಯ ಲೋಕಸಭೆಯಲ್ಲಿ ಟಿಎಂಸಿ ನಾಯಕರಾಗಿ ಮುಂದುವರಿಯಲಿದ್ದಾರೆ.
ಮುಂದಿನ ವಾರ ಮಮತಾ ಅವರು ದಹಲಿ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮುನ್ನವೇ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ಅಭಿಯಾನ ಸೇರಿದಂತೆ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ಮಮತಾ ಅವರಿಗೆ ಈ ಸ್ಥಾನ ನೆರವಾಗಲಿದೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.