ಕೋಲ್ಕತಾ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಹೀಗಿರುವಾಗ ಮನ್ ಕಿ ಬಾತ್ ಯಾರು ಕೇಳುತ್ತಾರೆ? ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಒದಗಿಸುವುದು ಮತ್ತು ಸೂಕ್ತ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಪ್ರಧಾನಿ ಮೋದಿ ಕ್ರಮ ಕೈಗೊಳ್ಳಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಅನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ಮೋದಿ, ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಮಾತನಾಡಬೇಕು, ಅದರ ಬದಲು ಮನ್ ಕಿ ಬಾತ್ ಮಾಡುತ್ತಾ ಕುಳಿತರೆ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ಮುರ್ಶಿದಾಬಾದ್ ಜಿಲ್ಲೆಯ ಬಹರಾಂಪುರದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಕೋವಿಡ್ ಲಸಿಕೆ ವಿಚಾರದಲ್ಲೂ ಮೋದಿ ತಾರತಮ್ಯ ಮಾಡುತ್ತಿದ್ದಾರೆ ಎಂದು ದೂರಿದರು.
ಅಲ್ಲದೆ, ಪಶ್ಚಿಮ ಬಂಗಾಳದಲ್ಲಿ ಹೊರಗಿನವರ ಪ್ರವೇಶದಿಂದ ಕೋವಿಡ್ ಸೋಂಕು ಹೆಚ್ಚಳಕ್ಕೆ ಕಾರಣವಾಯಿತು. ಇಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದರೂ ರಾಜ್ಯಕ್ಕೆ ಬೇಕಾದ ಪ್ರಮಾಣದಲ್ಲಿ ಔಷಧ ಮತ್ತು ಲಸಿಕೆಯನ್ನು ಪೂರೈಸುತ್ತಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.