ಕೋಲ್ಕತ್ತ: ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನರಿಗೆ ಉಚಿತವಾಗಿ ಕೋವಿಡ್-19 ಚುಚ್ಚುಮದ್ದು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದಿದ್ದು, ಲಸಿಕೆ ಸಂಗ್ರಹಿಸುವಲ್ಲಿ ರಾಜ್ಯಕ್ಕೆ ಸಹಾಯ ಮಾಡುವಂತೆ ಒತ್ತಾಯಿಸಿದ್ದಾರೆ.
ಆರೋಗ್ಯ ಮತ್ತು ಸಂಬಂಧಪಟ್ಟ ಎಲ್ಲರ ಯೋಗಕ್ಷೇಮಕ್ಕಾಗಿ ತ್ವರಿತ ಲಸಿಕಾ ಅಭಿಯಾನ ಕಾರ್ಯಕ್ರಮದ ಅಗತ್ಯವಿದೆ. ವಾಸ್ತವವಾಗಿ, ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವುದರಿಂದ ಚುನಾವಣೆಯನ್ನು ಸುರಕ್ಷಿತವಾಗಿ ನಡೆಸಲು ನಾವು ಪ್ರತಿ ಸರ್ಕಾರಿ ಮತ್ತು ಅರೆ ಸ್ವಾಯತ್ತ ಸಂಸ್ಥೆಗಳ ಉದ್ಯೋಗಿಗಳಿಗೆ ತುರ್ತು ಆಧಾರದ ಮೇಲೆ ಲಸಿಕೆ ನೀಡಬೇಕಾಗಿದೆ' ಎಂದು ಬ್ಯಾನರ್ಜಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಪರಿಸ್ಥಿತಿಯಲ್ಲಿ, ಸಾರ್ವಜನಿಕರಿಗೆ ಸಾಕಷ್ಟು ಪ್ರಮಾಣದ ಲಸಿಕೆಗಳನ್ನು ಸಂಗ್ರಹಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಸಂಬಂಧಪಟ್ಟವರೊಂದಿಗೆ ಈ ವಿಚಾರವನ್ನು ಚರ್ಚಿಸುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ. ಇದರಿಂದಾಗಿ ರಾಜ್ಯ ಸರ್ಕಾರವು ಗೊತ್ತುಪಡಿಸಿದ ಸ್ಥಳಗಳಿಂದ ಮೊದಲ ಆದ್ಯತೆಯ ಮೇಲೆ ಲಸಿಕೆಗಳನ್ನು ಖರೀದಿಸಲು ಸಾಧ್ಯವಾಗುತ್ತದೆ, ಏಕೆಂದರೆ ಪಶ್ಚಿಮ ಬಂಗಾಳ ಸರ್ಕಾರವು ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ನೀಡಲು ಬಯಸಿದೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಮಂಗಳವಾರದ ತನಕ ಕನಿಷ್ಠ 8 ಲಕ್ಷ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.