ಇಂಫಾಲ: ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರುವ ಮೂಲಕ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೆಸೆಯಲು ಬಿಜೆಪಿ ಬಯಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮುಂಬರುವ ಮಣಿಪುರ ವಿಧಾನಸಭೆ ಚುನಾವಣೆಯನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ.
ಲಂಘಾಬಲ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಿಂಗ್, 'ಕೇಂದ್ರ ಬಿಜೆಪಿ ಸರ್ಕಾರದಲ್ಲಿನ ಯಾವೊಬ್ಬ ಸಚಿವರ ವಿರುದ್ಧವೂ ಭ್ರಷ್ಟಾಚಾರದ ಆರೋಪ ಮಾಡಲು ಯಾರಿಗೂ ಸಾಧ್ಯವಾಗುವುದಿಲ್ಲ.ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರುವ ಮೂಲಕ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೆಸೆಯಲು ನಾವು ಬಯಸುತ್ತೇವೆ' ಎಂದಿದ್ದಾರೆ.
ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ, ರಾಜ್ಯವು ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾಗದ ರಸ್ತೆ, ರೈಲ್ವೆ ಮತ್ತು ವಿಮಾನ ಸಂಚಾರವು ಸುಧಾರಣೆಗೊಂಡಿದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.
60 ಸದಸ್ಯ ಬಲದಮಣಿಪುರ ವಿಧಾನಸಭೆಗೆ ಫೆಬ್ರುವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.