ಗುವಾಹಟಿ: ರಾಜ್ಯದಲ್ಲಿ ಗುರುವಾರ 4 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಹಲವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
‘ರಾಜ್ಯದಲ್ಲಿ ಬಾಲ್ಯವಿವಾಹ ಕೊನೆಗಾಣಿಸಲು ಸರ್ಕಾರ ಬದ್ಧವಾಗಿದೆ. ಈವರೆಗೂ 4,004 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಶುಕ್ರವಾರದಿಂದ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲರೂ ಸಹಕರಿಸಬೇಕು’ ಎಂದು ಫೇಸ್ಬುಕ್ನಲ್ಲಿ ಶರ್ಮಾ ಅವರು ಪೋಸ್ಟ್ ಮಾಡಿದ್ದಾರೆ.
ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್ ‘ಪ್ರಜಾವಾಣಿ’ಗೆ ತಿಳಿಸಿದರು.
ಶರ್ಮಾ ನೇತೃತ್ವದ ರಾಜ್ಯ ಸಚಿವ ಸಂಪುಟ ಜ. 23 ರಂದು ಅಸ್ಸಾಂನಲ್ಲಿ ಹೆಚ್ಚಿನ ತಾಯಂದಿರ ಮರಣ ಮತ್ತು ಶಿಶು ಮರಣ ಪ್ರಮಾಣಕ್ಕೆ ಪ್ರಮುಖ ಕಾರಣವಾದ ಬಾಲ್ಯ ವಿವಾಹದ ವಿರುದ್ಧ ಕ್ರಮಕ್ಕೆ ಕರ್ನಾಟಕ ಮಾದರಿ ಅನುಸರಿಸಲು ನಿರ್ಧರಿಸಿತ್ತು.