ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇತಕಿ ಚಿತಳೆ ಅವರು ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಚಿತಳೆ, ‘ಸರಿಯಾದ ಸಮಯದಲ್ಲಿ ಮಾತನಾಡುತ್ತೇನೆ. ಜೈ ಹಿಂದ್, ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದ್ದಾರೆ.
ಫೇಸ್ಬುಕ್ನಲ್ಲಿ ಮರಾಠಿ ಭಾಷೆಯಲ್ಲಿ ಪೋಸ್ಟ್ವೊಂದನ್ನುಪ್ರಕಟಿಸಿದ್ದ ಚಿತಳೆ, ‘ಪವಾರ್ ಹೆಸರನ್ನು ನಮೂದಿಸಿ, ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ. ನಿಮಗಾಗಿ ನರಕ ಕಾಯುತ್ತಿದೆ’ ಎಂದು ಬರೆದುಕೊಂಡಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ ನವಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮರಾಠಿ ನಟಿ ಕೇತಕಿ ಚಿತಳೆ ಅವರಿಗೆ ಜೂನ್ 16ರಂದು ಥಾಣೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.