ಲಖನೌ: ‘ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಮಹಿಳೆಯ ಕುಟುಂಬದವರಿಗೆ ಹಾಥರಸ್ ಜಿಲ್ಲಾಧಿಕಾರಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದರೂ, ಸರ್ಕಾರ ಮೌನವಾಗಿರುವುದನ್ನು ಕಂಡು ಬಹಳ ದುಃಖವಾಗುತ್ತಿದೆ‘ ಎಂದು ಎಂದು ಬಿಎಸ್ಪಿ ನಾಯಕಿ ಮಾಯಾವತಿ ಕಳವಳ ವ್ಯಕ್ತಪಡಿಸಿದ್ದಾರೆ.
‘ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿರುವುದೇನೋ ಸರಿ. ಆದರೆ, ಗಂಭೀರ ಆರೋಪ ಎದುರಿಸುತ್ತಿರುವ ಜಿಲ್ಲಾಧಿಕಾರಿ ಹಾಥರಸ್ನಲ್ಲೇ ಇದ್ದಾಗ, ನಿಷ್ಪಕ್ಷಪಾತವಾಗಿ ತನಿಖೆ ಹೇಗೆ ನಡೆಯುತ್ತದೆ? ಎಂಬುದರ ಬಗ್ಗೆ ನನಗೆ ಚಿಂತೆಯಾಗಿದೆ‘ ಎಂದು ಮಾಯಾವತಿ ಹೇಳಿದ್ದಾರೆ.
ಶನಿವಾರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಹಾಥರಸ್ನಲ್ಲಿ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.
ಇದೇ ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವುದಾಗಿ ಪ್ರಕಟಿಸಿದ್ದರು.