ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಜೋರಾಗಿದೆ. ಆದರೆ, ಬಿಜೆಪಿ ಇದಕ್ಕೆ ತಲೆಕೆಡಿಸಿಕೊಳ್ಳದೇ ಬಂಡಾಯ ಅಭ್ಯರ್ಥಿಗಳಿಗೆ ಬಿಸಿ ಮುಟ್ಟಿಸುವ ಪ್ರಕ್ರಿಯೆ ನಡೆಸಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ 11 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಈ 11 ಜನ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಎದುರು ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದರು.
ಅಮಾನತುಗೊಂಡವರಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧೆಗೆ ತಯಾರಿ ನಡೆಸಿದ್ದ ಹಿರಿಯ ನಾಯಕ ಗಜೇಂದ್ರ ದಾರಲ್ ಕೂಡ ಸೇರಿದ್ದಾರೆ. ಕೊನೆ ಕ್ಷಣದಲ್ಲಿ ಇವರ ಬದಲು ಅರುಣ್ ದಾರಲ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅವರು ಬಂಡಾಯ ಎದ್ದಿದ್ದಾರೆ.
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.