ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೋವಿಡ್-19 ವಿರುದ್ಧ ಹೋರಾಡಲು ಸರಿಯಾದ ಬದ್ಧತೆ, ನೀತಿ ಮತ್ತು ನಿರ್ಣಯದ ಅಗತ್ಯವಿದೆ ಎಂದು ಹೇಳಿದ್ದಾರೆ.
ಮೇ 30ರಂದು ಮನ್ ಕೀ ಬಾತ್ 77ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ವಿರುದ್ಧದ ಹೋರಾಟ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಕೋವಿಡ್-19 ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಅಂಕಿಅಂಶವು ಸರಿಯಿಲ್ಲ ಎಂದು ಕೇರಳದ ವಯನಾಡು ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದನ್ನು ತಕ್ಷಣ ನಿಯಂತ್ರಿಸದಿದ್ದರೆ ಮತ್ತಷ್ಟು ತೀವ್ರವಾಗಿ ಹರಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ಯೋಜನೆ ಸಮರ್ಪಕವಾಗಿಲ್ಲ ಎಂದು ಟೀಕಿಸಿದ್ದಾರೆ.