ಎಸ್ಕೆಎಂನ ಹಿರಿಯ ಮುಖಂಡರಾದ ರಾಕೇಶ್ ಟಿಕಾಯತ್, ಹನ್ನನ್ ಮುಲ್ಲಾ, ಜೋಗಿಂದರ್ ಸಿಂಗ್ ಉಗ್ರಹಾನ್, ಡಾ. ದರ್ಶನ್ ಪಾಲ್, ಜಗಜಿತ್ ಸಿಂಗ್ ದಲ್ಲೆವಾಲ್, ಶಿವಕುಮಾರ್ ಶರ್ಮಾ ಕಕ್ಕಾಜಿ ಮತ್ತು ಯೋಗೇಂದ್ರ ಯಾದವ್ ಅವರು ಮಾಧ್ಯಮಗೋಷ್ಠಿ ನಡೆಸಿದ್ದಾರೆ. ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ರೈತ ಮುಖಂಡರು ಖಂಡಿಸಿದ್ದಾರೆ. ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರು ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ. ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ರೈತರು ಆಗ್ರಹಿಸಿದ್ದರು.