ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಿದ್ದು, ಬೆದರಿಕೆ ಹಾಕಲಾಗುತ್ತಿದೆ. ಇದೊಂದು ಗಂಭೀರ ವಿಷಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಈ ಕುರಿತು ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ಇಂದು ಸಭೆ ಸೇರಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷ ಒಡೆಯಲು ಆಮಿಷ ಒಡ್ಡಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಕೆಲವು ಶಾಸಕರು ನನ್ನ ಬಳಿ ಬಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ. ಈ ಕುರಿತು ಇಂದು ಸಂಜೆ 4 ಗಂಟೆಗೆ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಕೇಜ್ರಿವಾಲ್, ಗುಜರಾತ್ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ತನಿಖೆ ಹಾಗೂ ದಾಳಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಎಎಪಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದರೆ ಸಿಎಂ ಸ್ಥಾನ ಹಾಗೂ ಸಿಬಿಐ ಹಾಗೂ ಇ.ಡಿ ಪ್ರಕರಣ ಕೈಬಿಡುವುದಾಗಿ ತಮಗೆ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿದ್ದರು.
ಶಾಸಕರಾದ ಅಜಯ್ ದತ್, ಸಂಜೀವ್ ಜಾ, ಸೋಮನಾಥ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಬಿಜೆಪಿಗೆ ಸೇರಿದರೆ ತಲಾ ₹20 ಕೋಟಿ ಮತ್ತು ಇತರೆ ಶಾಸಕರನ್ನು ಕರೆತಂದರೆ ₹25 ಕೋಟಿ ನೀಡುವ ಆಮಿಷ ಒಡ್ಡಿರುವುದಾಗಿ ಸಿಂಗ್ ಹೇಳಿದ್ದಾರೆ.