ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ಮುಖಂಡ, ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು. ದಕ್ಷಿಣ ಮುಂಬೈನ ಇ.ಡಿ ಕಚೇರಿಯಲ್ಲಿ ಸುಮಾರು ಐದು ಗಂಟೆ ಅವರನ್ನು ಪ್ರಶ್ನಿಸಲಾಗಿತ್ತು.
ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಅವರನ್ನು ಸೋಮವಾರ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಆರ್.ಎನ್.ರೋಕಡೆ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆಗಾಗಿ ಇ.ಡಿ ಅವಧಿ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡದಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಮಾರ್ಚ್ 21ರ ವರೆಗೂ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.
Maharashtra Minister and NCP leader Nawab Malik sent to judicial custody by Special PMLA court in Mumbai.
He was arrested by ED on Feb 23rd, in connection with Dawood Ibrahim money laundering case.
ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಎನ್ಐಎ ಇತ್ತೀಚೆಗೆ ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ಇ.ಡಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಎನ್ಐಎ ಅಪರಾಧ ಪ್ರಕರಣ ದಾಖಲಿಸಿದೆ.