ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಏಪ್ರಿಲ್ 5ಕ್ಕೆ ಮುಂದೂಡಿದೆ. ಸರ್ಕಾರದ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಜಾಮೀನು ಅರ್ಜಿಗೆ ಇ.ಡಿ ನೀಡಿರುವ ಪ್ರತಿಕ್ರಿಯೆಗೆ ಉತ್ತರಿಸಲು ಸಿಸೋಡಿಯಾ ಪರ ವಕೀಲರು ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಮೂರ್ತಿ ಎಂ.ಕೆ.ನಾಗಪಾಲ್ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಈ ವಿಚಾರವಾಗಿ ವಿವರವಾದ ವಾದ ಮಂಡಿಸಲು ಸಮಯಾವಕಾಶ ಬೇಕು ಎಂದು ಸಿಸೋಡಿಯಾ ಪರ ವಕೀಲರು ಕೇಳಿದರು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆಯೇ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಕೇಂದ್ರ ತನಿಖಾ ದಳದಿಂದ (ಸಿಬಿಐ) ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು. ತಿಹಾರ್ ಜೈಲಿನಲ್ಲಿದ್ದ ಅವರನ್ನು ಇ.ಡಿ. ಅಧಿಕಾರಿಗಳು ಮಾರ್ಚ್ 9ರಂದು ವಶಕ್ಕೆ ಪಡೆದಿದ್ದರು.
ಆಮ್ ಆದ್ಮಿ ಪಕ್ಷ ನಾಯಕ ಸಿಸೋಡಿಯಾ ಅವರು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಜಾಮೀನು ಅರ್ಜಿ ಮೇಲಿನ ತೀರ್ಪನ್ನು ಮಾರ್ಚ್ 31ರಂದು ಪ್ರಕಟಿಸುವುದಾಗಿ ಕೋರ್ಟ್ ಶುಕ್ರವಾರ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.