ಹುಬ್ಬಳ್ಳಿ: ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಐದು ಸುಗ್ರೀವಾಜ್ಞೆಗಳು ಸೇರಿದಂತೆ 20 ಪ್ರಮುಖ ಮಸೂದೆಗಳನ್ನು ಮಂಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 18 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. ಸರ್ಕಾರ ಎಲ್ಲಾ ರೀತಿಯ ರಚನಾತ್ಮಕ ಚರ್ಚೆಗೆ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ, ಯಾರೂ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಸಂಪುಟದಿಂದ ಸಚಿವರನ್ನು ಕೈಬಿಟ್ಟಿರುವುದಕ್ಕೆ ತಲೆದಂಡ ಎನ್ನುವುದು ಸರಿಯಲ್ಲ. ಹೊಸಬರಿಗೆ ಅವಕಾಶ ಕೊಡುವ ದೃಷ್ಟಿಯಿಂದ ಆರೇಳು ವರ್ಷ ಸಚಿವರಾಗಿದ್ದವರನ್ನು ಕೈಬಿಡಲಾಗಿದೆ. ಅವರಿಗೆ ಪಕ್ಷದ ಸಂಘಟನೆಯ ಮಹತ್ವದ ಜವಾಬ್ದಾರಿ ವಹಿಸಬಹುದು ಎಂದರು.