ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಕುರಿತು ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂಬ ಪಂಜಾಬ್ ಸರ್ಕಾರದ ಕೋರಿಕೆಯನ್ನು ಹೈಕೋರ್ಟ್ ಒಪ್ಪಿಲ್ಲ ಎಂದು ಮೂಲಗಳು ತಿಳಿಸಿವೆ.
ಹೈಕೋರ್ಟ್ ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದೆ. ಪ್ರಕರಣದ ತನಿಖೆಯ ಉದ್ದೇಶಕ್ಕಾಗಿ ನ್ಯಾಯಮೂರ್ತಿಯೊಬ್ಬರನ್ನು ನಿಯೋಜಿಸಲಾಗದು ಎಂದು ತಿಳಿಸಿರುವುದಾಗಿ ಮೂಲಗಳು ಹೇಳಿವೆ.
ಹೈಕೋರ್ಟ್ನಲ್ಲಿ ಸುಮಾರು 4.50 ಲಕ್ಷ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಸದ್ಯ, ನ್ಯಾಯಮೂರ್ತಿಗಳ 38 ಹುದ್ದೆಗಳು ಖಾಲಿ ಇವೆ ಎಂದು ಹೈಕೋರ್ಟ್ ಆಡಳಿತ ಕಾರಣ ನೀಡಿದೆ. ಈ ಕುರಿತು ತಕ್ಷಣಕ್ಕೆ ಸರ್ಕಾರದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಮೇ 29ರಂದು ಅಪರಿಚಿತ ದುಷ್ಕರ್ಮಿಗಳು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಗೆ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸುವ ತೀರ್ಮಾನವನ್ನು ಸರ್ಕಾರ ಪ್ರಕಟಿಸಿತ್ತು. ಇದಕ್ಕೆ ಪೂರಕವಾಗಿ ಮುಖ್ಯ ಕಾರ್ಯದರ್ಶಿಗಳು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಮೇ 30ರಂದು ಪತ್ರ ಬರೆದಿದ್ದರು.