ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿವಾದದ ಕೇಂದ್ರಬಿಂದುವಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಬುಧವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಹಿಂಸಾಚಾರದಲ್ಲಿ ತಮ್ಮ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲಾದ ನಂತರ ಇದೇ ಮೊದಲ ಬಾರಿಗೆ ಮಿಶ್ರ ಅವರು ಗೃಹ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವರ ಕಚೇರಿಯಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಇದ್ದ ಸಚಿವ ಮಿಶ್ರಾ ಅವರು ಕಚೇರಿ ಕೆಲಸಗಳು ಪೂರ್ಣಗೊಂಡ ನಂತರ ಅಲ್ಲಿಂದ ಹೊರಟರು ಎಂದು ಮೂಲಗಳು ತಿಳಿಸಿವೆ.
ನಂತರ ಸಚಿವರು ಅಮಿತ್ ಶಾ ಅವರ ನಿವಾಸಕ್ಕೂ ಭೇಟಿ ನೀಡಿದರು. ಅಲ್ಲಿಯೂ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಇದ್ದರು.
ಮಿಶ್ರಾ ಅವರು ತಮ್ಮ ತವರು ಜಿಲ್ಲೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಘಟನೆಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರೈತರ ಸಾವಿಗೆ ಸಂಬಂಧಿಸಿದಂತೆ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಹಲವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ವೇಳೆ, ತಮ್ಮ ಪುತ್ರ ಕಾರಿನಲ್ಲಿದ್ದ ಎಂಬ ರೈತ ಸಂಘಗಳ ಆರೋಪವನ್ನು ಸಚಿವರು ನಿರಾಕರಿಸಿದ್ದಾರೆ.