ನವದೆಹಲಿ: ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಲ್ಯಾಂಡ್ ಮಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಈ ವಿಮಾನದಲ್ಲಿ 236 ಪ್ರಯಾಣಿಕರು ಹಾಗೂ 8 ಮಂದಿ ವಿಮಾನ ಸಿಬ್ಬಂದಿಗಳು ಸೇರಿ ಒಟ್ಟು 244 ಮಂದಿ ಪ್ರಯಾಣಿಸುತ್ತಿದ್ದರು.
ವಾಯು ಸಂಚಾರ ನಿಯಂತ್ರಣ ಕೊಠಡಿ (ಎಟಿಸಿ)ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಹೀಗಾಗಿ ಜಾಮ್ನಗರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
‘ಎಲ್ಲಾ 236 ಪ್ರಯಾಣಿಕರು ಹಾಗೂ 8 ವಿಮಾನ ಸಿಬ್ಬಂದಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ವಿಮಾನವನ್ನು ಪರಿಶೀಲನೆ ನಡೆಸಿದ್ದಾರೆ‘ ಎಂದು ರಾಜ್ಕೋಟ್ ಹಾಗೂ ಜಾಮ್ನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಶೋಕ್ ಕುಮಾರ್ ಯಾದವ್ ತಿಳಿಸಿದ್ದಾರೆ.
ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಏರ್ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ಅಝುರ್ ಏರ್ ವಿಮಾನದಲ್ಲಿ ಬಾಂಬ್ ಭೀತಿಯ ಬಗ್ಗೆ ಭಾರತೀಯ ಅಧಿಕಾರಿಗಳು ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾರೆ. ವಿಮಾನವನ್ನು ಜಾಮ್ನಗರದ ಭಾರತೀಯ ವಾಯುಪಡೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ‘ ಎಂದು ರಷ್ಯಾದ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾಸ್ಕೋದಿಂದ ಟೇಕಾಫ್ ಆಗಿದ್ದ ಈ ವಿಮಾನವು ಡಬೋಲಿಮ್ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿತ್ತು. ಸದ್ಯ ಡಬೋಲಿಮ್ ಏರ್ಪೋರ್ಟ್ನ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.