ಭೋಪಾಲ್: ಮಧ್ಯಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಪ್ರವಾಹ ಪೀಡಿತ 40 ಗ್ರಾಮಗಳಿಂದ 1,200 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆದಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾನುವಾರ ಹೇಳಿದ್ದಾರೆ.
ಭಾರಿ ಮಳೆಯ ಪರಿಣಾಮ ಕಳೆದೆರಡು ದಿನಗಳಿಂದ ರಾಜ್ಯದ 12 ಜಿಲ್ಲೆಗಳ 454 ಗ್ರಾಮಗಳಲ್ಲಿ ಸಿಲುಕಿಕೊಂಡಿದ್ದ 7 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದೂ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿದ್ದು, ಪ್ರವಾಹ ಪರಿಸ್ಥಿಯ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.
ಇದುವರೆಗೆ 9,300 ಜನರು 170 ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ವಾಯುಪಡೆಯ ಮೂರು ಹೆಲಿಕಾಪ್ಟರ್ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ಇನ್ನೂ ಎರಡು ಹೆಲಿಕಾಪ್ಟರ್ಗಳನ್ನು ನೀಡಬೇಕೆಂದು ಕೋರಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.