ನವದೆಹಲಿ: ಕಳೆದ ತಿಂಗಳು ಬಿಎಸ್ಪಿಯಿಂದ ಉಚ್ಚಾಟಿತರಾದ ಉತ್ತರ ಪ್ರದೇಶದ ಪ್ರಮುಖ ಬ್ರಾಹ್ಮಣ ನಾಯಕ ನಕುಲ್ ದುಬೆ ಅವರು ಗುರುವಾರ ಕಾಂಗ್ರೆಸ್ ಪಕ್ಷ ಸೇರಿದರು.
ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅವರ ಸಮ್ಮುಖದಲ್ಲಿ ಪಕ್ಷ ಸೇರಿದ ದುಬೆ ಅವರು, ‘ಉತ್ತರ ಪ್ರದೇಶದ ಜತೆಗೆ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಶಕ್ತಿಯುತಗೊಳಿಸಲು ಶ್ರಮಿಸುವುದಾಗಿ’ ಹೇಳಿದರು.
ವೃತ್ತಿಯಲ್ಲಿ ವಕೀಲರಾಗಿರುವ ದುಬೆ ಅವರನ್ನುಅಶಿಸ್ತು ಮತ್ತು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಪಕ್ಷದಿಂದ ಉಚ್ಚಾಟಿಸಿದ್ದರು. ನಕುಲ್ ಅವರು 2007ರ ಬಿಎಸ್ಪಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.