ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆನಂದ್ ಗಿರಿ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನು ಒಳಗೊಂಡ ಪೀಠವು ಅಲಹಾಬಾದ್ ಹೈಕೋರ್ಟ್ ಆದೇಶ ಎತ್ತಿ ಹಿಡಿದಿದೆ.
‘ಅರ್ಜಿದಾರರ ಹಿರಿಯ ವಕೀಲರು ಮತ್ತು ಪ್ರತಿವಾದಿಗಳ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ವಾದ ಆಲಿಸಿದ್ದೇವೆ ಮತ್ತು ಆದೇಶವನ್ನು ಪರಿಶೀಲಿಸಿದ್ದೇವೆ. ಈ ಹಂತದಲ್ಲಿ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣ ಕಾಣುತ್ತಿಲ್ಲ’ ಎಂದು ಪೀಠ ಹೇಳಿದೆ.
ಪರಿಸ್ಥಿತಿಯಲ್ಲಿ ಬದಲಾವಣೆ ಕಂಡು ಬಂದರೆ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಸಮಂಜಸವಾದ ಸಮಯದವರೆಗೆ ಈ ವಿಷಯದಲ್ಲಿ ಯಾವುದೇ ಪ್ರಗತಿ ಇಲ್ಲದಿದ್ದರೆ, ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನಿಗಾಗಿ ತಮ್ಮ ಮನವಿ ಸಲ್ಲಿಸಲು ಮುಕ್ತವಾಗಿದ್ದಾರೆ ಎಂದು ಪೀಠ ಸ್ಪಷ್ಟಪಡಿಸಿದೆ.