ನವದೆಹಲಿ: ಪಂಜಾಬ್ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಲ್ಲಿ ಭೇಟಿಯಾಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಂಜಾಬ್ನಲ್ಲಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹರೀಶ್ ರಾವತ್ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸಿಧು ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಈ ವರದಿಯನ್ನು ನಿರಾಕರಿಸಿರುವ ಹರೀಶ್ ರಾವತ್, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಿಂಗ್ ಮತ್ತು ಸಿಧು ಒಟ್ಟಾಗಿ ಕೆಲಸ ಮಾಡುವಂತಹ ’ಸೂತ್ರ’ವೊಂದನ್ನು ಪಕ್ಷದ ಹೈಕಮಾಂಡ್ ರೂಪಿಸುತ್ತಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ಬೆಳವಣಿಗೆಗಳ ನಡುವೆ ಇಬ್ಬರೂ ನಾಯಕರು ಪರಸ್ಪರ ಜಗಳವಾಡುತ್ತಿದ್ದಾರೆ. ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮತ್ತೊಂದು ಕಡೆ ಇಬ್ಬರು ನಾಯಕರು ಚಂಡಿಗಡದಲ್ಲಿ ಪ್ರತ್ಯೇಕವಾಗಿ ಪಕ್ಷದ ತಮ್ಮ ಆಪ್ತ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.