ಮುಂಬೈ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ತಮ್ಮ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಉತ್ತರ ಪ್ರದೇಶದ ಜನ ಬದಲಾವಣೆ ಬಯಸಿದ್ದಾರೆ. ಹಾಗೆಯೇ ಆಗಲಿದೆ. ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕೋಮು ಧ್ರುವೀಕರಣಕ್ಕೆ ಅಲ್ಲಿನ ಜನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಗೋವಾ, ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿಯೂ ಎನ್ಸಿಪಿ ಸ್ಪರ್ಧಿಸಲಿದೆ ಎಂದೂ ಅವರು ತಿಳಿಸಿದ್ದಾರೆ. ಮಣಿಪುರದಲ್ಲಿ ಎನ್ಸಿಪಿಯು ಕಾಂಗ್ರೆಸ್ ಜತೆ ಚೆನ್ನಾಗಿದೆ. ಗೋವಾದಲ್ಲಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಜತೆ ಮಾತುಕತೆ ನಡೆಯುತ್ತಿದೆ ಎಂದು ಪವಾರ್ ತಿಳಿಸಿದ್ದಾರೆ.
ಇದೇ ವೇಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.