ನವದೆಹಲಿ: ಗಡಿ ವಿಷಯವಾಗಿ ಪದೇ ಪದೇ ತಂಟೆ ತೆಗೆಯುವ ಚೀನಾಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಚಾಟಿ ಬೀಸಿದ್ದಾರೆ. ಪರಿಸ್ಥಿತಿಯನ್ನು ಮತ್ತಷ್ಟೂ ಸಂಕೀರ್ಣಗೊಳಿಸುವ ಚಟುವಟಿಕೆಗಳನ್ನು ಬಿಡಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
ಆಕ್ರಮಣಕಾರಿ ಚಟುವಟಿಕೆಗಳನ್ನು ಕೈಬಿಡುವ ನಿಟ್ಟಿನಲ್ಲಿ ಸ್ವಯಂ ನಿಯಂತ್ರಣ ಹಾಗೂ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಕ್ರಮಗಳಿಂದ ದೂರ ಇರುವುದರಿಂದ ಉಭಯ ದೇಶಗಳ ನಡುವೆ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಹೇಳಿದರು.
ಆಸಿಯಾನ್ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ರಕ್ಷಣಾ ಸಚಿವರ ಸಭೆಯಲ್ಲಿ (ಎಡಿಎಂಎಂ–ಪ್ಲಸ್) ಅವರು ಮಾತನಾಡಿದರು. ಆನ್ಲೈನ್ ಮೂಲಕ ನಡೆದ ಸಭೆಯಲ್ಲಿ ಚೀನಾ ರಕ್ಷಣಾ ಸಚಿವ ವೀ ಫೆಂಗ್ ಅವರೂ ಇದ್ದರು. ಈ ಒಕ್ಕೂಟದ ಸದಸ್ಯ ರಾಷ್ಟ್ರಗಳ ಸಂಖ್ಯೆ 10.
ಲಡಾಖ್ನ ಪೂರ್ವ ಗಡಿಯಲ್ಲಿ ಚೀನಾ ಕ್ಯಾತೆ ತೆಗೆದ ಕಾರಣ ಕಳೆದ ಏಳು ತಿಂಗಳಿನಿಂದ ನಿರ್ಮಾಣವಾಗಿರುವ ಪ್ರಕ್ಷುಬ್ಧ ಸ್ಥಿತಿ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆಗೆ ಮಹತ್ವ ಬಂದಿದೆ.
‘ಏಷ್ಯಾದ ಈ ಪ್ರದೇಶದಲ್ಲಿ ಸದ್ಯದ ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಆದರೆ, ಪ್ರಾದೇಶಿಕ ಸಹಕಾರದ ಮೂಲಕ ಭದ್ರತೆ, ಬಹುತ್ವವನ್ನು ಕಾಪಾಡುವಲ್ಲಿ ಆಸಿಯಾನ್ ನೇತೃತ್ವದ ವಿವಿಧ ವೇದಿಕೆಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯ’ ಎಂದು ರಾಜನಾಥ್ ಸಿಂಗ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.