ಲಖನೌ: ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿರುವುದು ಬೆಳಕಿಗೆ ಬಂದಿದೆ.
ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಬಳಿಕ ಇದೀಗ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರೂ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಯಾರೆಂಬುದನ್ನು ಚುನಾವಣೆಯ ಬಳಿಕ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
‘ಪಕ್ಷದ ಚುನಾಯಿತ ಪ್ರತಿನಿಧಿಗಳು ತಮ್ಮ ನಾಯಕ ಯಾರೆಂಬುದನ್ನು ಆರಿಸಲಿದ್ದಾರೆ. ಕೆಲವೊಂದು ಸಂದರ್ಭಗಳಲ್ಲಿ ಕೇಂದ್ರ ನಾಯಕತ್ವವೂ ಆ ಬಗ್ಗೆ ಗಮನಹರಿಸಲಿದೆ’ ಎಂದು ಅವರು ಹೇಳಿದ್ದಾರೆ.
2017ರಲ್ಲಿಯೂ ಬಿಜೆಪಿಯು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಯೋಗಿ ಆದಿತ್ಯನಾಥ ಅವರನ್ನು ಚುನಾವಣೆ ಫಲಿತಾಂಶದ ಬಳಿಕ ಆಯ್ಕೆ ಮಾಡಲಾಗಿತ್ತು ಎಂದೂ ಅವರು ಹೇಳಿದ್ದಾರೆ.
ಆದಿತ್ಯನಾಥ ಮಾತ್ರವಲ್ಲದೆ ಮುಖ್ಯಮಂತ್ರಿ ಸ್ಥಾನಕ್ಕೆ ಇತರ ಆಕಾಂಕ್ಷಿಗಳೂ ಇರಬಹುದು ಎಂದೂ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ. ಇನ್ನೂ ಆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಕೇಶವ ಪ್ರಸಾದ್ ಮೌರ್ಯ ಈ ಹಿಂದೆ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.