ನವದೆಹಲಿ: ಪಟಾಕಿ ನಿಷೇಧ ಕೋರಿರುವ ಮೇಲ್ಮನವಿಯ ತ್ವರಿತ ವಿಚಾರಣೆಗೆ ಒತ್ತು ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ), ಕರ್ನಾಟಕವೂ ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ನವೆಂಬರ್ 7ರಿಂದ -30ರವರೆಗೆ ಪಟಾಕಿ ನಿಷೇಧಿಸುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸರ್ಕಾರಗಳಿಗೆ ಈ ಹಿಂದೆಯೇ ನ್ಯಾಯಪೀಠ ಸೂಚಿಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿನ ಗಾಳಿಯ ಗುಣಮಟ್ಟ ಹದಗೆಡು ತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
‘ಮಾಲಿನ್ಯ ನಿಯಂತ್ರಣ ನಿಯಮಗಳ ಉಲ್ಲಂಘನೆಯ ಪ್ರಮಾಣ ಹೆಚ್ಚಿರುವುದೇ ಈ ರಾಜ್ಯಗಳ 122 ನಗರಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡುವು ದಕ್ಕೆ ಕಾರಣ’ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಬಹಿರಂಗಪಡಿಸಿದ್ದಾಗಿ ವಿಚಾರಣೆಯ ವೇಳೆ ನ್ಯಾಯಪೀಠಕ್ಕೆ ವಿವರಿಸಲಾಯಿತು. ರಾಜ್ಯದ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ– ಧಾರವಾಡ ಮತ್ತು ಕಲಬುರ್ಗಿ ನಗರಗಳಲ್ಲಿ ಆಗಸ್ಟ್ ಮಧ್ಯಭಾಗದಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿತ್ತು ಎಂದು ಮಂಡಳಿಯ ವರದಿ ಹೇಳಿದೆ.
ಒಡಿಶಾ ಹಾಗೂ ರಾಜಸ್ಥಾನಗಳಲ್ಲಿ ಈಗಾಗಲೇ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ.
ತಜ್ಞರಸಲಹೆಯಂತೆತೀರ್ಮಾನ
ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ರಾಸಾಯನಿಕ ಹರಡಿ ಕೋವಿಡ್ ಹೆಚ್ಚಾಗುವ ಅಪಾಯ ಇದೆ ಎಂದು ತಜ್ಞರು ಸೂಚಿಸಿದ್ದಾರೆ. ಈ ಕುರಿತುತಜ್ಞರವರದಿಯೊಂದನ್ನು ಪಡೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಸಚಿವ ಡಾ.ಸುಧಾಕರ್ ತಿಳಿಸಿದರು.
ಇದಕ್ಕೆ ಸಂಬಂಧಿಸಿದಂತೆತಜ್ಞರಸಮಿತಿಯೊಂದನ್ನು ನೇಮಿಸಲಾಗಿದೆ. ಅವರಿಂದ ವರದಿ ಬಂದ ಬಳಿಕ ದೀಪಾವಳಿಯಲ್ಲಿ ಪಟಾಕಿ ಸಿಡಿಸಲು ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಅಂತಿಮತೀರ್ಮಾನತೆಗೆದುಕೊಳ್ಳಲಾಗುವುದು. ಸರಳ ಮತ್ತು ಸಾಂಪ್ರದಾಯಿಕವಾಗಿ ದೀಪಾವಳಿ ಆಚರಣೆಗೆ ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಅವರು ಹೇಳಿದರು.