ಎಂಬಿಬಿಎಸ್ ನಿಯಮಾವಳಿಗಳಲ್ಲಿ ತಿದ್ದುಪಡಿ ಕೋರಿಕೆ: ಎನ್ಜಿಟಿಯಿಂದ ಅರ್ಜಿ ವಜಾ

ನವದೆಹಲಿ: ದೇಶದ ಪ್ರತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರಗಳ ಸ್ಥಾಪನೆಯನ್ನು ಕಡ್ಡಾಯಗೊಳಿಸುವಂತೆ ಎಂಬಿಬಿಎಸ್ ನಿಯಮಾವಳಿಗಳಲ್ಲಿ ತಿದ್ದುಪಡಿ ತರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೋಮವಾರ ನಿರಾಕರಿಸಿದೆ.
‘ಇದು ನೀತಿಗೆ ಸಂಬಂಧಿಸಿದ ವಿಷಯವಾಗಿದೆ. ಇದನ್ನು ಪರಿಸರಕ್ಕೆ ಸಂಬಂಧಿಸಿದ ವಿಷಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಹಾಗಾಗಿ ಈ ಕುರಿತಾಗಿ ಸಂಬಂಧ ಪಟ್ಟ ಪ್ರಾಧಿಕಾರಕ್ಕೆ ಮೊರೆ ಹೋಗಬಹುದು’ ಎಂದು ಎನ್ಜಿಟಿಯ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠವು ಸೂಚಿಸಿದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊರಡಿಸಿದ ವಾರ್ಷಿಕ ಎಂಬಿಬಿಎಸ್ ಪ್ರವೇಶ ನಿಯಮಾವಳಿಗಳ ಕನಿಷ್ಠ ಅವಶ್ಯಕತೆಗಳಲ್ಲಿ (2020) ತಿದ್ದುಪಡಿ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿ ಎಚ್.ಸಿ ಅರೋರಾ ಎಂಬವರು ಅರ್ಜಿ ಸಲ್ಲಿಸಿದ್ದರು.
‘ಭಾರತದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಪ್ರತಿನಿತ್ಯ ಹಲವರು ಸಾವಿಗೀಡಾಗುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ದೃಷ್ಟಿಯಿಂದ ದೇಶದ ಪ್ರತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರಗಳ ಸ್ಥಾಪನೆಯನ್ನು ಕಡ್ಡಾಯಗೊಳಿಸುವಂತೆ ಎಂಬಿಬಿಎಸ್ ನಿಯಮಾವಳಿಯಲ್ಲಿ ತಿದ್ದುಪಡಿ ತರಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.