ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನವದೆಹಲಿಯಲ್ಲಿ ಸೋಮವಾರ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ‘ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು.ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ’ ಎಂದರು.
‘ಬಿಹಾರದಲ್ಲಿ ಇತ್ತೀಚೆಗೆ ನಡೆದರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜೆ.ಪಿ. ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ.ಈಗ ದೇಶದಲ್ಲಿ ಬಲವಾದ ವಿರೋಧ ಪಕ್ಷದ ಅವಶ್ಯಕತೆ ಇದೆ’ ಎಂದರು.
ನಿತೀಶ್–ರಾಹುಲ್ ಭೇಟಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಭೇಟಿ ಆದರು. ದೇಶದ ಇಂದಿನ ರಾಜಕೀಯ ಪರಿಸ್ಥಿತಿ ಮತ್ತು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕುರಿತು ಅವರಿಬ್ಬರೂ ಭೇಟಿ ವೇಳೆ ಚರ್ಚಿಸಿದ್ದಾರೆ ಎನ್ನಲಾಗಿದೆ.