ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಶೀಲನೆ ನಡೆಸಿ ಶಿಫಾರಸುಗಳನ್ನು ಮಾಡುವಂತೆ 21 ನೇ ಕಾನೂನು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
21ನೇ ಕಾನೂನು ಆಯೋಗದ ಅವಧಿ 2018ರ ಆ.31ಕ್ಕೆ ಕೊನೆಗೊಂಡಿತ್ತು. ಕಾನೂನು ಆಯೋಗದ ಮಾಹಿತಿ ಪ್ರಕಾರ, ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿಷಯವನ್ನು 22 ನೇ ಕಾನೂನು ಆಯೋಗ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು.
ಆದ್ದರಿಂದ, ಏಕರೂಪ ನಾಗರಿಕ ಸಂಹಿತೆ ಅನುಷ್ಠಾನದ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಅವರು ಹೇಳಿದರು.