ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಗೆ ಬೇಕಾದ ಎಲ್ಲ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶುಕ್ರವಾರ ಹೇಳಿದ್ದಾರೆ.
2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಗುರುವಾರದಂದು ಕಾಶ್ಮೀರಕ್ಕೆ ಪ್ರವೇಶಿಸಿತ್ತು. ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.
ಯಾತ್ರೆಗೆ ಭದ್ರತಾ ಸಮಸ್ಯೆ ಇರುವುದಿಲ್ಲ. ಎಲ್ಲ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಧಾನ ಮಂತ್ರಿ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರಿ ವಲಸೆ ನೌಕರರಿಗೆ ಮೆಗಾ ವಸತಿ ಯೋಜನೆ ಉದ್ಘಾಟಿಸಿ ಮಾತನಾಡಿದ ಲೆಫ್ಟಿನೆಂಟ್, ನೈಜ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಹೇಳಿದರು.