ನವದೆಹಲಿ: ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಸಂಸತ್ನ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಲ್ಲದೇ, ಜನವರಿಯಲ್ಲಿ ಬಜೆಟ್ ಅಧಿವೇಶನ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಅವರಿಗೆ ಬರೆದಿರುವ ಪತ್ರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ವಿಷಯ ತಿಳಿಸಿದ್ದಾರೆ.
‘ಕೋವಿಡ್–19 ಪಿಡುಗಿನ ಕಾರಣ ಚಳಿಗಾಲದ ಅವಧಿಯಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ಇತ್ತೀಚಿನ ಕೆಲ ದಿನಗಳಲ್ಲಿ ದೆಹಲಿ ಸೇರಿದಂತೆ ಕೆಲವೆಡೆ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳವೂ ಕಂಡುಬಂದಿದೆ. ಹೀಗಾಗಿ ಚಳಿಗಾಲದ ಅಧಿವೇಶನ ನಡೆಸದಿರಲು ತೀರ್ಮಾನಿಸಲಾಗಿದೆ’ ಎಂದು ಸಚಿವ ಜೋಶಿ ವಿವರಿಸಿದ್ದಾರೆ.
‘ಅಧಿವೇಶನ ನಡೆಸದೇ ಇರುವ ಕುರಿತಂತೆ ಎಲ್ಲ ಪಕ್ಷಗಳ ಸಭಾನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಕೋವಿಡ್ ಪಿಡುಗಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನಾಯಕರು, ಅಧಿವೇಶನ ರದ್ದುಪಡಿಸುವ ಬಗ್ಗೆಯೂ ಸಹಮತ ವ್ಯಕ್ತಪಡಿಸಿದ್ದಾರೆ‘ ಎಂದು ಜೋಶಿ ತಿಳಿಸಿದ್ದಾರೆ.