ಲಖನೌ: ‘ಉತ್ತರ ಪ್ರದೇಶವು ಒಂದು ಕಾಲದಲ್ಲಿ ದರೋಡೆಕೋರರು ಮತ್ತು ಕಳಪೆ ಕಾನೂನು ಸುವ್ಯವಸ್ಥೆಯ ಪಾಲನೆಗೆ ಹೆಸರುವಾಸಿಯಾಗಿತ್ತು. ಆದರೆ, ಈಗ ಅದೇ ರಾಜ್ಯವನ್ನು ವೇಗವಾಗಿ ಪ್ರಗತಿ ಸಾಧಿಸುತ್ತಿರುವ ರಾಜ್ಯವಾಗಿ ಗುರುತಿಸಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.
9,055ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪ್ರಾದೇಶಿಕ ಸಶಸ್ತ್ರ ಪಡೆಯ ಕಮಾಂಡರ್ಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರವು ಜನರಲ್ಲಿ ಭದ್ರತೆಯ ಭಾವನೆಯನ್ನು ಬಲಪಡಿಸಿದೆ’ ಎಂದರು.
‘ಈ ಹೊಸ ನೇಮಕಾತಿಗಳಿಂದ ರಾಜ್ಯದ ಪೊಲೀಸ್ ಪಡೆ ಬಲಗೊಳ್ಳಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ (2017) ಉತ್ತರಪ್ರದೇಶ ಪೊಲೀಸ್ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಹೊಸ ನೇಮಕಾತಿಗಳನ್ನು ಮಾಡಲಾಗಿದೆ. ಬಿಜೆಪಿ ಆಡಳಿತವಿರುವ ಈ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಿದೆ’ ಎಂದೂ ಮೋದಿ ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಹಣಕಾಸು ಸಚಿವ ಸುರೇಶ್ ಖನ್ನಾ ಸೇರಿದಂತೆ ಇತರರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಅವರ ರೆಕಾರ್ಡ್ ಮಾಡಿದ ವಿಡಿಯೊ ಸಂದೇಶವನ್ನು ಪ್ರಸಾರ ಮಾಡಲಾಯಿತು.