ನವದೆಹಲಿ: ಇಲ್ಲಿನ ಜಹಾಂಗಿರ್ಪುರಿ ಪ್ರದೇಶದಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಗುಂಡು ಹಾರಿಸಿದ್ದ ಆರೋಪದ ಮೇಲೆ 28 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಜಹಾಂಗಿರ್ಪುರಿ ಸಿ–ಬ್ಲಾಕ್ ನಿವಾಸಿ ಸೋನು ಅಲಿಯಾಸ್ ಇಮಾಮ್ ಅಲಿಯಾಸ್ ಯೂನಸ್ ಎಂದು ಗುರುತಿಸಲಾಗಿದೆ.
‘ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ಹರಿದಾಡಿತ್ತು. ಅದರಲ್ಲಿ ನೀಲಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ಗುಂಡು ಹಾರಿಸುತ್ತಿರುವುದು ಕಂಡುಬಂದಿತ್ತು. ಆ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ವಾಯವ್ಯ ದೆಹಲಿ ಡಿಸಿಪಿ ತಿಳಿಸಿದ್ದಾರೆ.
ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ ಶನಿವಾರ ಸಂಜೆ ಜಹಾಂಗಿರ್ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.