ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಲ್ಲಿನ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ‘ಕಿಸಾನ್ ಸಂಸತ್‘ನಲ್ಲಿ, ಸಂಸತ್ತಿನ 14 ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸುವುದರ ಜತಗೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳ ನಾಯಕರು ಸಭೆ ಸೇರಿ, ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನಿರ್ಧಾರ ಕೈಗೊಂಡರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ರೈತರ ‘ಕಿಸಾನ್ ಸಂಸತ್‘ನಲ್ಲಿ ಭಾಗವಹಿಸಲಿದ್ದಾರೆ. ಹೊಸ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ರೈತರ ಬೇಡಿಕೆಯನ್ನು ಬೆಂಬಲಿಸುತ್ತಾರೆ ಎಂದು ತಿಳಿಸಿದರು.
ವಿರೋಧ ಪಕ್ಷಗಳಾದಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎನ್ಸಿಪಿ,ಶಿವಸೇನಾ, ಆರ್ಜೆಡಿ, ಎಸ್ಪಿ, ಸಿಪಿಐಎಂ, ಎಎಪಿ, ಸಿಪಿಐ, ಐಯುಎಂಎಲ್, ಆರ್ಎಸ್ಪಿ, ಎನ್ಸಿ ಮತ್ತು ಎಲ್ಜೆಡಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಸಭೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂಬಂಧ ಯಾವ ರೀತಿಯ ಕಾರ್ಯತಂತ್ರ ರೂಪಿಸಬೇಕೆಂಬುದರ ಕುರಿತು ಚರ್ಚೆ ನಡೆಸಿದ್ದಾರೆ.