ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಭದ್ರತೆಗಾಗಿ ಸುಮಾರು 27 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಲ್ಲಿ ಭಯೋತ್ಪಾದನಾ ನಿಗ್ರಹ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಆಸ್ಥಾನ ಭಾನುವಾರ ಹೇಳಿದ್ದಾರೆ.
ಇದರಲ್ಲಿ ಉಪ ಪೊಲೀಸ್ ಆಯುಕ್ತರು, ಪೊಲೀಸ್ ಸಹಾಯಕ ಆಯುಕ್ತರು, ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ಗಳು, ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಮತ್ತು ಕಮಾಂಡರ್ಗಳು, ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಯೋಧರು ಇರಲಿದ್ದಾರೆ ಎಂದು ಅವರು ಹೇಳಿದರು.
ಗಣರಾಜ್ಯೋತ್ಸವದ ಭದ್ರತಾ ವ್ಯವಸ್ಥೆಯ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ವಿವರಿಸಿದ ಅವರು, ದೆಹಲಿಯಲ್ಲಿನ ಗಣರಾಜ್ಯೋತ್ಸವ ಪಥಸಂಚಲನದಲ್ಲಿ 71 ಡಿಸಿಪಿಗಳು, 213 ಎಸಿಪಿಗಳು ಮತ್ತು 753 ಇನ್ಸ್ಪೆಕ್ಟರ್ಗಳು ಸೇರಿದಂತೆ ಒಟ್ಟು 27,723 ದೆಹಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಆಸ್ಥಾನ ಹೇಳಿದರು.
ಕಳೆದ ಎರಡು ತಿಂಗಳಿಂದ ದೆಹಲಿ ಪೊಲೀಸರು ಭದ್ರತಾ ಸಂಸ್ಥೆಗಳೊಂದಿಗಿನ ಸಹಕಾರದಿಂದ ಭಯೋತ್ಪಾದಕ ನಿಗ್ರಹ ಕ್ರಮಗಳನ್ನು ತೀವ್ರಗೊಳಿಸಿದ್ದಾರೆ ಎಂದೂ ಅವರು ಹೇಳಿದರು.